ಗೋವಿನ ಹಾಡು - ಧರಣಿ ಮಂಡಲ ಮಧ್ಯದೊಳಗೆ
ಜನಪದ ಗೀತೆ - ಗೋವಿನ ಹಾಡು
ಧರಣಿ ಮಂಡಲ ಮಧ್ಯದೊಳಗೆ ಮೆರೆವುದೈವತ್ತಾರು ದೇಶದಿ
ಇರುವ ಕಾಳಿಂಗನೆಂಬ ಗೊಲ್ಲನು ಪರಿಯನಾನೆಂತು ಪೇಳ್ವೆನು
ಉದಯಕಾಲದೊಳೆದ್ದು ಗೊಲ್ಲನು ನದಿಯ ಸ್ನಾನವ ಮಾಡಿಕೊಂಡು
ಮದನತಿಲಕವ ಹಣೆಯೊಳಿಟ್ಟು ಚದುರಶಿಕೆಯನು ಹಾಕಿದ
ಎಳೆಯ ಮಾವಿನ ಮರದ ಕೆಳಗೆ ಕೊಳನನೂದುತ ಗೊಲ್ಲಗೌಡನು
ಬಳಸಿ ನಿಂದ ತುರುಗಳನ್ನು ಬಳಿಗೆ ಕರೆದನು ಹರುಷದಿ
ಗಂಗೆ ಬಾರೆ ಗೌರಿ ಬಾರೆ ತುಂಗಭದ್ರೆ ನೀನು ಬಾರೆ
ಕಾಮಧೇನು ನೀನು ಬಾರೆಂದು ಪ್ರೇಮದಿಂದಲಿ ಕರೆದನು
ಪುಣ್ಯಕೋಟಿಯೆ ನೀನು ಬಾರೆ ಪುಣ್ಯವಾಹಿನಿ ನೀನು ಬಾರೆ
ಪೂರ್ಣಗುಣಸಂಪನ್ನೆ ಬಾರೆಂದು ನಾಣ್ಯದಿಂ ಗೊಲ್ಲ ಕರೆದನು
ಗೊಲ್ಲ ಕರೆದಾ ಧ್ವನಿಯು ಕೇಳಿ ಎಲ್ಲ ಪಶುಗಳು ಬಂದುವಾಗ
ಚೆಲ್ಲಿಸೂಸಿ ಪಾಲಕರೆಯಲು ಅಲ್ಲಿ ತುಂಬಿತು ಬಿಂದಿಗೆ
ಒಡನೆದೊಡ್ಡಿಯ ಬಿಡುತ ಪಶುಗಳು ನಡೆದವಾಗಾರಣ್ಯಕ್ಕಾಗಿ
ಕಡಲು ಮೇಘವು ತೆರಳುವಂದದಿ ನಡೆದವಾಗಾರಣ್ಯಕೆ
ಅಟ್ಟಬೆಟ್ಟದ ಕಿಬ್ಬಿಯೊಳಗೆ ಇಟ್ಟಡೆಯಬೆಟ್ಟಾದ ನಡುವೆ
ದಟ್ಟೈಸಿದಾ ಸಸಿಗಳೆಡೆಯೊಳು ಮುಟ್ಟಿ ಮೇದವು ಹುಲ್ಲನು
ಹಬ್ಬಿದಾ ಮಲೆಮದ್ಯದೊಳಗೆ ಅರ್ಭುತಾನೆಂತೆಂಬ ವ್ಯಾಘ್ರನು
ಗಬ್ಬಿತನದೊಳು ಬೆಟ್ಟದಾ ಅಡಿ ಕಿಬ್ಬಿಯೊಳು ತಾನಿರುವನು
ಒಡಲಿಗೇಳು ದಿವಸದಿಂದ ತಡೆದಾಹಾರವ ಬಳಲಿ ವ್ಯಾಘ್ರನು
ತುಡುಕಿ ಎರೆದವ ರಭಸದಿಂದೊಗ್ಗೊಡೆದವಾಗಾ ಗೋವ್ಗಳು
ಅದರ ರಭಸಕೆ ನಿಲ್ಲನರಿಯದ ಕದುಬಿಕಮರಿಯ ಬಿದ್ದು ಪಶುಗಳು
ಪದರಿತಳ್ಳಣಗೊಂಡ ಪಶುಗಳು ಚೆದರಿ ಓಡಿಹೋದವು
ಕನ್ನೆಮಗನಾ ಪಡೆದುಕೊಂಡು ತನ್ನ ಕಂದನ ನೆನೆದುಕೊಂಡು
ಪುಣ್ಯಕೋಟಿಎಂಬ ಪಶುವು ಚೆನ್ನಾಗಿ ತಾ ಬರುತಿದೆ
ಇಂದು ಎನಗಾಹಾರ ಸಂದಿತು ಎನುತಲಾಗ ದುಷ್ಟವ್ಯಾಘ್ರನು
ಬಂದು ಬಳಸಿ ಅಡ್ಡಕಟ್ಟಿಕೊಂಡಿತಾಗ ಪಶುವನು
ಖೂಳ ಹುಲಿಯಾ ಅಡ್ಡಕಟ್ಟಿ ಬೀಳಹೊಯ್ವೆನು ನಿನ್ನನೆನುತಲಿ
ಸೀಳಿಬಿಸುಡುವೆ ಬೇಗನೆನುತಾ ಪ್ರಳಯವಾಗಿಯೆ ಕೋಪಿಸೆ
ಒಂದು ಬಿನ್ನಹ ಹುಲಿಯರಾಯನೆ ಕಂದನೈದನೆ ಮನೆಯಒಳಗೆ
ಒಂದು ನಿಮಿಶದಿ ಮೊಲೆಯ ಕೊಟ್ಟು ಬಂದು ನಾನಿಲ್ಲಿ ನಿಲ್ಲುವೆ
ಹಸಿದವೇಳೆಗೆ ಸಿಕ್ಕಿದೊಡವೆಯ ವಶವಮಾಡಿಕೊಳ್ಳದೀಗ
ನುಸುಳಿಹೋದರೆ ನೀನು ಬರುವೆಯ ಹಸನಾಯಿತೀಗೆಂದಿತು
ಮೂರುಮೂರ್ತಿಗಳಾಣೆ ಬರುವೆನು ಸೂರ್ಯಚಂದಮನಾಣೆ ಬರುವೆನು
ಧಾರುಣಿದೇವಿಯಾಣೆ ಬರುವೆನು ಎಂದು ಭಾಷೆಯ ಮಾಡಿತು
ಬರುವೆಂದು ಭಾಷೆಮಾಡಿ ತಪ್ಪೆನೆಂದಾ ಪುಣ್ಯಕೋಟಿಯು
ಒಪ್ಪಿಸಲೊಡೊಂಬುಟ್ಟು ವ್ಯಾಘ್ರನು ಅಪ್ಪಣೆಯ ತಾ ಕೊಟ್ಟಿತು
ಅಲ್ಲಿಂದ ಕಳುಹೀಸಿಕೊಂಡು ನಿಲ್ಲದೆ ದೊಡ್ಡೀಗೆ ಬಂದು
ಚೆಲ್ವ ಮಗನನು ಕಂಡು ಬೇಗ ಅಲ್ಲಿ ಕೊಟ್ಟಿತು ಮೊಲೆಯನು
ಕಟ್ಟಕಡೆಯಲಿ ಮೇಯದೀರು ಬೆಟ್ಟದೊತ್ತಿಗೆ ಹೋಗದೀರು
ದುಷ್ಟವ್ಯಾಘ್ರಗಳುಂಟು ಅಲ್ಲಿ ನಟ್ಟನಡುವೆ ಬಾರಯ್ಯನೇ
ಕೊಂದೆನೆಂಬ ದುಷ್ಟವ್ಯಾಘ್ರಗೆ ಚೆಂದದಿಂದ ಭಾಷೆಯಿತ್ತು
ಕಂದ ನಿನ್ನನು ನೋಡಿಪೋಗುವೆ ನೆಂದು ಬಂದೆನು ದೊಡ್ಡಿಗೆ
ಅಮ್ಮನೀನು ಸಾಯಲೇಕೆ ಸುಮ್ಮನಿರು ನೀ ಎಲ್ಲಾರ ಹಾಗೆ
ತಮ್ಮ ತಾಯಿಗೆ ಪೇಳಿ ಕರುವು ಸುಮ್ಮಾವನಡಗೀ ನಿಂದಿತು
ಕೊಟ್ಟಭಾಷೆಗೆ ತಪ್ಪಲಾರೆನು ಕೆಟ್ಟಯೋಚನೆ ಮಾಡಲಾರೆನು
ನಿಷ್ಟೆಯಿಂದಲಿ ಪೋಪೆನಲ್ಲಿಗೆ ಕಟ್ಟಕಡೆಗಿದು ಖಂಡಿತ
ಸತ್ಯವೇ ನಮ್ಮತಾಯಿತಂದೆ ಸತ್ಯವೇ ನಮ್ಮ ಸಕಲ ಬಳಗೆ
ಸತ್ಯವಾಕ್ಯಕೆ ತಪ್ಪಿದಾರೆ ಅಚ್ಚುತ ಹರಿ ಮೆಚ್ಚನು
ಆರ ಮೊಲೆಯಾ ಕುಡಿಯಲಮ್ಮ ಆರ ಸೇರಿ ಬದುಕಲಮ್ಮ
ಆರ ಬಳಿಯಲಿ ಮಲಗಲಮ್ಮ ಆರು ನನ್ನಗೆ ಹಿತವರು
ಅಮ್ಮಗಳಿರಾ ಅಕ್ಕಗಳಿರಾ ಎನ್ನತಾಯೊಡಹುಟ್ಟುಗಳಿರಾ
ನಿಮ್ಮ ಕಂದಾನೆಂದು ಕಾಣಿರಿ ತಬ್ಬಲಿಯ ಮಗನೈದನೇ
ಮುಂದೆ ಬಂದರೆ ಹಾಯದೀರಿ ಹಿಂದೆ ಬಂದರೆ ಒದೆಯದೀರಿ
ನಿಮ್ಮಕಂದನೆಂದು ಕಂಡಿರಿ ತಬ್ಬಲಿಯ ಕಂದೈದನೆ
ತಬ್ಬಲಿಯುನೀನಾದೆ ಮಗನೆ ಹೆಬ್ಬುಲಿಯ ಬಾಯನ್ನು ಹೊಗೆವೆನು
ಇಬ್ಬರಾ ಋಣ ತೀರಿತೆಂದು ತಬ್ಬಿಕೊಂಡಿತು ಕಂದನ
ಕಂದನೀಗೆ ಬುದ್ದಿ ಹೇಳಿ ಬಂದಳಾಗ ಪುಣ್ಯಕೋಟಿಯು
ಚೆಂದದಿಂದ ಪುಣ್ಯನದಿಯೊಳು ಮಿಂದು ಸ್ನಾನವ ಮಾಡಿತು
ಗೋವು ಸ್ನಾನವ ಮಾಡಿಕೊಂಡು ಗವಿಯ ಬಾಗಿಲಪೊಕ್ಕು ನಿಂತು
ಸಾವಕಾಶವ ಮಾಡದಂತೆ ವ್ಯಾಘ್ರರಾಯನ ಕರೆದಳು
ಖಂಡವಿದೆಕೋ ರಕ್ತವಿದೆಕೋ ಗುಂಡಿಗೆಯ ಕೊಬ್ಬೂಗಳಿದೆ ಕೋ
ಉಂಡು ಸಂತಸಗೊಂಡು ನೀ ಭೂಮಂಡಲದೊಳು ಬಾಳಯ್ಯನೆ
ಪುಣ್ಯಕೋಟಿಯು ಬಂದು ನುಡಿಯೆ ತನ್ನ ಮನದೊಳು ಹುಲಿಯರಾಯನು
ಕನ್ನೆಯಿವಳನು ಕೊಂದುತಿಂದರೆ ಎನ್ನ ನರಹರಿ ಮೆಚ್ಚನು
ಎನ್ನ ಒಡಹುಟ್ಟಕ್ಕ ನೀನು ನಿನ್ನ ಕೊಂದು ಏನ ಪಡೆವೆನು
ನಿನ್ನ ಪಾದದ ಮೇಲೆ ಬಿದ್ದು ಎನ್ನ ಪ್ರಾಣವ ಬಿಡುವೆನು
ಯಾಕಯ್ಯ ಹುಲಿರಾಯ ಕೇಳು ಜೋಕೆಯಿಂದಲಿ ಎನ್ನನೊಲ್ಲದೆ
ನೂಕಿ ನೀನು ಸಾಯಲೇಕೆ ಬೇಕೆಂದೂ ನಾ ಬಂದೆನು
ಪುಣ್ಯಕೋಟಿಯ ಮಾತ ಕೇಳಿ ಕಣ್ಣಿನೊಳಗೆ ನೀರಸುರಿಯುತ
ಅನ್ಯಕಾರಿಯು ತಾನುಎನುತಲಿ ತನ್ನ ಮನದೊಳು ಧ್ಯಾನಿಸಿ
ಮೂರುಮೂರ್ತಿಗೆ ಕೈಯ್ಯಮುಗಿದು ಸೇರಿ ಎಂಟು ದಿಕ್ಕನೋಡಿ
ಹಾರಿ ಆಕಾಶಕ್ಕೆ ನೆಗೆದು ತನ್ನ ಪ್ರಾಣವ ಬಿಟ್ಟಿತು.
Recent comments
37 weeks 6 days ago
38 weeks 3 days ago
38 weeks 6 days ago
39 weeks 17 hours ago
48 weeks 6 days ago
50 weeks 12 hours ago
1 year 3 days ago
1 year 3 days ago
1 year 3 days ago
1 year 3 days ago